ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸುತ್ತಮುತ್ತಲಿನ ಜನರು ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಸರ್ಕಾರದಿಂದ ದೊರೆಯುವ ಪರಿಹಾರ ಹಾಗೂ ಇತರ ನೆರವುಗಳ ಕುರಿತು ಗಮನಹರಿಸುವುದಾಗಿ ಭರವಸೆ ನೀಡಿದರು.
ದುರಂತದಲ್ಲಿ ಮೃತಪಟ್ಟವರ ಮಕ್ಕಳು ಭಯಭೀತರಾಗಿದ್ದು, ಮಾನಸಿಕ ಹಾಗೂ ದೈಹಿಕವಾಗಿ ಬಳಲುತ್ತಿದ್ದಾರೆ. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಿದ ಅವರು, ಸ್ಥಳೀಯ ಸಮುದಾಯ ಆಸ್ಪತ್ರೆಯ ನರ್ಸ್ಗಳು ಮನೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಮಾಜಿ ಸಚಿವ ಶಿವಾನಂದ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ಈಶ್ವರ ನಾಯ್ಕ, ಭಟ್ಕಳ












